newsics.com / ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮೂಲಕ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದೆ.
ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಪರಿಷ್ಕರಣೆ ಆರಂಭವಾದ ಬೆನ್ನಲ್ಲೇ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಇವರು ಗೃಹಲಕ್ಷ್ಮೀ ಯೋಜನೆಗೆ ಅನರ್ಹ ಎಂದು ಗುರುತಿಸಲಾಗಿದೆ.
ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ಅವರ ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಿದೆ. ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ ಮತ್ತು GST ಪಾವತಿಸುವ 1.94 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ. ಜೊತೆಗೆ, ಮೃತಪಟ್ಟ 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿದ್ದ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದ್ದು, ಅಂತಹ ಖಾತೆಗಳಿಗೆ ಸಹ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.
ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಅನರ್ಹ ಫಲಾನುಭವಿಗಳ ಪೈಕಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 47,871 ಗೃಹಲಕ್ಷ್ಮಿಯರನ್ನ ಕೈಬಿಡಲಾಗಿದೆ. ತದನಂತರ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆ ಅನರ್ಹರ ಪರಿಷ್ಕರಣೆಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿವೆ.
ಮಾರ್ಚ್ ತಿಂಗಳಲ್ಲೇ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ವಿವಿಧ ಸರ್ಕಾರಿ ದತ್ತಾಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಈ ಪರಿಷ್ಕರಣೆ ಕೈಗೊಂಡಿದೆ. ಅನರ್ಹರಿಗೆ ಹಣ ಪಾವತಿಯಾಗುವುದನ್ನು ತಡೆಯುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲೂ ಸಿದ್ಧತೆ ನಡೆಸಿದೆ. ಈ ಕ್ರಮದಿಂದ ತಾಂತ್ರಿಕ ಲೋಪಗಳು ಮತ್ತು ನಕಲಿ ಫಲಾನುಭವಿಗಳ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂ. ಉಳಿತಾಯವಾಗಲಿದೆ.
Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?
Harrased by Ola driver ಓಲಾ ಕ್ಯಾಬ್ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!