ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸುಳ್ಳು ಸುದ್ದಿಗೆ ಇದೀಗ ಕಾನೂನು ತಿರುವು ಸಿಕ್ಕಿದೆ. ತಮ್ಮ ಸಾವಿನ ಕುರಿತು ಸುಳ್ಳು ಮಾಹಿತಿ ಹಬ್ಬಿಸಿದವರ ವಿರುದ್ಧ ದೊಡ್ಡಣ್ಣ ಪೊಲೀಸ್ ದೂರು ದಾಖಲಿಸಿದ್ದಾರೆ.
ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು. ಈ ಸುದ್ದಿ ರಾಜ್ಯದಾದ್ಯಂತ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಹಲವರು ಆತಂಕಗೊಂಡಿದ್ದರು. ಅನೇಕರು ದೂರವಾಣಿ ಕರೆಗಳ ಮೂಲಕ ದೊಡ್ಡಣ್ಣ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.
ವದಂತಿ ಹರಡಿದ ದಿನವೇ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದ ದೊಡ್ಡಣ್ಣ, ತಾವು ಸಂಪೂರ್ಣ ಆರೋಗ್ಯವಾಗಿರುವುದಾಗಿ ಸ್ಪಷ್ಟಪಡಿಸಿದ್ದರು. ಅಲ್ಲದೆ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಈಗ ತಮ್ಮ ಮಾತಿನಂತೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿರುವ ದೊಡ್ಡಣ್ಣ, ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
“ಸುಳ್ಳು ಸುದ್ದಿ ಹರಡಿದವರನ್ನು ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕು. ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ದೊಡ್ಡಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.