ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸುತ್ತಿದ್ದ ಹಿರಿಯ ವಕೀಲ ಎಸ್. ಸುನಿಲ್ ಕುಮಾರ್ ಅವರು ಹೈಕೋರ್ಟ್ಗೆ ತಾವು ಈ ಪ್ರಕರಣದ ವಕಾಲತ್ತಿನಿಂದ ನಿವೃತ್ತಿ ಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ.
ರೇಣುಕಸ್ವಾಮಿ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅವಕಾಶ ನೀಡದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ.
ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರು, ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವಿಳಂಬದ ಕಾರಣ ಜಾಮೀನು ಹಾಗೂ ಮೂಲಭೂತ ಸೌಲಭ್ಯಗಳಿಗಾಗಿ ಆಗಿದ್ದು, ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ತಡೆಯುವ ಪ್ರಯತ್ನವಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, ಈ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರಿಂದ ಯಾವುದೇ ಸೂಚನೆ ದೊರೆತಿಲ್ಲ ಎಂದು ಹೇಳಿದ ಅವರು, ಪ್ರಕರಣದಿಂದ ಹೊರಬರಲು ಬಯಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು.
ವಕೀಲರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಪ್ರಕರಣದ ಮೆರಿಟ್ ಕುರಿತು ಯಾವುದೇ ವಿಚಾರಣೆ ನಡೆಸದೆ, ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.
ಇನ್ನೊಂದೆಡೆ, ರೇಣುಕಸ್ವಾಮಿ ತಾಯಿ ರತ್ನಪ್ರಭಾ ತಮ್ಮ ಹಿಂದಿನ ಹೇಳಿಕೆಯಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅವಕಾಶ ನೀಡಬೇಕು ಎಂಬುದು ಪ್ರಾಸಿಕ್ಯೂಷನ್ನ ಪ್ರಮುಖ ಬೇಡಿಕೆಯಾಗಿದೆ.