newsics.com | ನ್ಯೂಸಿಕ್ಸ್
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಎಫ್ಐಆರ್ (FIR) ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ತನಿಖಾ ತಂಡ (SIT) ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಮಾಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಬಂಧಿತ ಆರೋಪುಗಳು. ಎಫ್ ಐಆರ್ನಲ್ಲಿ ಇತರ ಕೆಲವು ಅಪರಿಚಿತ ವ್ಯಕ್ತಿಗಳ ಹೆಸರನ್ನೂ ಉಲ್ಲೇಖಿಸಲಾಗಿದೆ.
ಆರೋಪಿಗಳ ವಿರುದ್ಧ ಕಳ್ಳತನ, ವಿಶ್ವಾಸದ್ರೋಹ, ಕದ್ದ ಆಸ್ತಿಯನ್ನು ಮರೆಮಾಡುವುದು ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಟ್ರಸ್ಟಿ ಕೃಷ್ಣ ಮೋಹನ್ ಯಾರು?
ಹಿರಿಯ ಟ್ರಸ್ಟಿ ಕಾಮೇಶ್ವರ್ ಚೌಪಾಲ್ ಅವರ ನಿಧನದ ನಂತರ, ತೆರವಾಗಿದ್ದ ಸ್ಥಾನಕ್ಕೆ ಹರ್ದೋಯಿ ನಿವಾಸಿಯಾದ ಕೃಷ್ಣ ಮೋಹನ್ ಅವರನ್ನು ಸೆಪ್ಟೆಂಬರ್ 16, 2025 ರಂದು ಟ್ರಸ್ಟಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಲಕ್ನೋ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿರುವ ಇವರು, ಪರಮಾಣು ಇಂಧನ ವಲಯದಲ್ಲಿ ಆರು ವರ್ಷ ಕೆಲಸ ಮಾಡಿದ್ದರು. ಆ ಬಳಿಕ ಭಾರತೀಯ ಅರಣ್ಯ ಸೇವೆಗೆ (IFS) ಆಯ್ಕೆಯಾಗಿ, 2012 ರಲ್ಲಿ ನಿವೃತ್ತರಾದ ನಂತರ ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ.
ದೇಣಿಗೆ ದುರುಪಯೋಗದ ಬಗ್ಗೆ ಟ್ರಸ್ಟ್ ಮಾಡಿದ ಮನವಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರ ಜೂನ್ 13 ರಂದು ಎಸ್ಐಟಿ (SIT) ರಚಿಸಿತ್ತು. ಇದಕ್ಕೂ ಮುನ್ನ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ನಾಪತ್ತೆಯಾಗಿದೆ ಎಂದು ಆರೋಪಿಸಿ, ನ್ಯಾಯಾಲಯಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಎಚ್ಪಿ ಮುಖ್ಯಸ್ಥ ಅಲೋಕ್ ಕುಮಾರ್, ಮುಂಬರುವ 2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಸ್ಪಿ ಮತ್ತು ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ ಎಂದು ತಿರುಗೇಟು ನೀಡಿದ್ದರು.
Siya – Kethan ಉದ್ಯಮಿ ಕೇತನ್ ಕೊ*ಲೆ ಪ್ರಕರಣ: ಪ್ರತಿದಿನ ಹೊಸ ಕಥೆ, ಹ*ತ್ಯೆಗೆ ನಿಜ ಕಾರಣ ಬಹಿರಂಗ