newsics.com| ನ್ಯೂಸಿಕ್ಸ್
ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತು ನಾಯಕತ್ವದ ಪೈಪೋಟಿ ಮತ್ತೊಮ್ಮೆ ಬೀದಿಗೆ ಬಂದಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರದ್ದೆನ್ನಲಾದ ಆಡಿಯೋ ಕ್ಲಿಪ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ವೈರಲ್ ಆಗಿರುವ ಆಡಿಯೋದಲ್ಲಿ ಪ್ರದೀಪ್ ಎಂಬ ವ್ಯಕ್ತಿಯೊಂದಿಗೆ ಮಾತನಾಡುತ್ತಾ, ‘ವಿಜಯೇಂದ್ರ ಅವಧಿ ಮುಗಿಯುವವರೆಗೆ ಕಾಯ್ದು, ಅಕ್ಟೋಬರ್ನಲ್ಲಿ ಅವರನ್ನು ಹೊರಹಾಕಬೇಕು’ ಎಂಬ ಮಾತುಗಳು ಕೇಳಿಬಂದಿವೆ. ಇದೇ ಸಂಭಾಷಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿ.ಎಲ್. ಸಂತೋಷ್ ಅವರ ‘ಡಬಲ್ ಗೇಮ್’ ರಾಜಕೀಯದ ಪ್ರಸ್ತಾಪವಾಗಿದ್ದು, ರಾಜ್ಯ ಬಿಜೆಪಿಯೊಳಗಿನ ಲಿಂಗಾಯತ ನಾಯಕತ್ವವನ್ನು ದುರ್ಬಲಗೊಳಿಸುವ ಕುರಿತು ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.
ಹೈಕಮಾಂಡ್ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದರೂ, ಪಕ್ಷದ ಪ್ರತಿಯೊಂದು ಹೆಜ್ಜೆಯಲ್ಲೂ ಹಿರಿಯ ನಾಯಕರ ಹಸ್ತಕ್ಷೇಪವಿರುವುದು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ. ಯಡಿಯೂರಪ್ಪನವರ ಕಾಲದಲ್ಲೂ ನಡೆದಿದ್ದ ಇಂತಹದೇ ಕಿರುಕುಳದ ಪ್ರಯತ್ನಗಳು ಈಗ ವಿಜಯೇಂದ್ರ ವಿರುದ್ಧವೂ ಮರುಕಳಿಸುತ್ತಿವೆ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಬಿ.ಎಲ್. ಸಂತೋಷ್ ಅವರ ಚುನಾವಣಾ ಪ್ರಯೋಗಗಳು ಮತ್ತು ಜೋಷಿ ಅವರ ನಡೆಗಳು ಪಕ್ಷದ ಒಗ್ಗಟ್ಟಿಗೆ ಮಾರಕವಾಗುತ್ತಿವೆಯೇ ಎಂಬ ಪ್ರಶ್ನೆ ಎದ್ದಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ಬಿಜೆಪಿಗೆ ಬೇಕಿರುವುದು ಅಧ್ಯಕ್ಷರ ಬದಲಾವಣೆಯಲ್ಲ, ಬದಲಾಗಿ ನಾಯಕರ ಮನಸ್ಥಿತಿಯ ಬದಲಾವಣೆ. ರಾಜ್ಯಾಧ್ಯಕ್ಷರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಪಕ್ಷಕ್ಕೆ ಭವಿಷ್ಯವಿದೆ ಎಂಬುದು ರಾಜಕೀಯ ವಿಶ್ಲೇಷಕರ ಮತ್ತು ನಿಷ್ಠಾವಂತ ಕಾರ್ಯಕರ್ತರ ವಾದವಾಗಿದೆ