newsics.com | ನ್ಯೂಸಿಕ್ಸ್
ಬೆಂಗಳೂರು: ಕರಾವಳಿ ತೀರದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಿಗ್ ಅಲರ್ಟ್ ಘೋಷಿಸಲಾಗಿದೆ. ಜುಲೈ 8ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆಯ ರೌದ್ರಾವತಾರ ಮುಂದುವರಿಯಲಿದ್ದು, ‘ರೆಡ್ ಅಲರ್ಟ್’ ಜಾರಿಗೊಳಿಸಲಾಗಿದೆ.
ಮಲೆನಾಡು ಮತ್ತು ಇತರೆ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮುಂಗಾರು ಚುರುಕಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭೂಕುಸಿತ (Landslide) ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಕಾರವಾರದಲ್ಲಿ ಕಡಲಕೊರೆತ:
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಅಂಕೋಲಾ ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದೆ. ಹಾರವಾಡದಲ್ಲಿ ಕಡಲಕೊರೆತ ತೀವ್ರಗೊಂಡಿದ್ದು, ರಕ್ಕಸ ಅಲೆಗಳು ತೀರದ ಮನೆಗಳ ಅಂಗಳಕ್ಕೆ ಅಪ್ಪಳಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಸಮುದ್ರದ ಪಾಲಾಗುವ ಭೀತಿಯಲ್ಲಿದ್ದ ಸತೀಶ ಹರಿಕಂತ್ರ ಹಾಗೂ ಸುಮಿತ್ರ ಹರಿಕಂತ್ರ ಎಂಬುವರ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ದೂದಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 11 ಅಡಿಯಷ್ಟು ನೀರು ಹೆಚ್ಚಾಗಿದ್ದು, ನಿಪ್ಪಾಣಿ ತಾಲೂಕಿನ ಕೆಳಹಂತದ ಪ್ರಮುಖ 3 ಸೇತುವೆಗಳಾದ ಕಾರದಗಾ-ಬೋಜ್ ಸೇತುವೆ, ಬೋಜವಾಡಿ-ಭೋಜ್ ಸೇತುವೆ, ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡಿವೆ.
ಸಿಲಿಕಾನ್ ಸಿಟಿಯಲ್ಲಿ ಶೀತ ಗಾಳಿ:
ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದಲ್ಲಿ ವಾತಾವರಣ ಸಂಪೂರ್ಣ ತಂಪಾಗಿದ್ದು, ಜಿಟಿಜಿಟಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ರಾತ್ರಿಯ ವೇಳೆಗೆ ನಗರದಾದ್ಯಂತ ಮಳೆ ಚುರುಕಾಗುವ ಸಾಧ್ಯತೆ ಇದೆ.