newsics.com | ನ್ಯೂಸಿಕ್ಸ್
ಮಂಡ್ಯ: ರಾಜ್ಯಾದ್ಯಂತ ಮಳೆಯಿಲ್ಲದೆ ಬರದ ಛಾಯೆ ಆವರಿಸಿರುವ ಸಮಯದಲ್ಲೇ, ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಕರ್ನಾಟಕಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಲು ಮಧ್ಯಂತರ ಆದೇಶ ಹೊರಡಿಸಿದ್ದು, ಕಾವೇರಿ ಭಾಗದ ಜನರನ್ನು ಕೆರಳಿಸಿದೆ. ಆದೇಶ ಹೊರಬಿದ್ದ ಕೂಡಲೇ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿಡಬ್ಲ್ಯೂಆರ್ಸಿ ಆದೇಶದ ವಿರುದ್ಧ ಮಂಡ್ಯದ ಪ್ರತಿಷ್ಠಿತ ಸಂಜಯ ವೃತ್ತದಲ್ಲಿ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, “ರಕ್ತ ಕೊಟ್ಟೇವು, ನೀರು ಕೊಡೆವು!” ಎಂದು ಘೋಷಣೆ ಕೂಗಿ ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದರು. ಇದರಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು.
ಪ್ರಸ್ತುತ ಕೃಷ್ಣರಾಜಸಾಗರ (KRS) ಜಲಾಶಯದಲ್ಲಿ ನೀರಿನ ಮಟ್ಟ ಕೇವಲ 92 ಅಡಿಗೆ ಕುಸಿದಿದೆ. ಈಗಾಗಲೇ ಮಳೆಯಿಲ್ಲದೆ ಬೆಳೆಗಳು ಒಣಗಿದ್ದು, ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಅಣೆಕಟ್ಟು ಸಂಪೂರ್ಣ ಖಾಲಿಯಾಗಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ ಎಂದು ರೈತರು ಕಣ್ಣೀರಿಟ್ಟಿದ್ದಾರೆ.
ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕೆಆರ್ಎಸ್ನಿಂದ ನೀರು ಹರಿಸಬಾರದು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ನೀರು ಬಿಡುಗಡೆ ಮಾಡಲು ಮುಂದಾದರೆ, ರಾಜ್ಯಾದ್ಯಂತ ಕಾವೇರಿ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸುವುದಾಗಿ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದ್ದಾರೆ.