newsics.com
ಮಂಡ್ಯ: ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 14 ವರ್ಷದ ಅಪ್ರಾಪ್ತ ಬಾಲಕಿ ಇಂಪನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಹಾಗೂ ಕಚ್ಚಿಗೆರೆ ಮತ್ತು ಮಲ್ಲಯ್ಯನದೊಡ್ಡಿ ಗ್ರಾಮದ ತಲಾ ಒಬ್ಬ ಸೇರಿದಂತೆ ನಾಲ್ವರು ಅಪ್ರಾಪ್ತರು ಚುಡಾಯಿಸಿದರೆನ್ನಲಾಗಿದೆ.
ಗ್ರಾಮದ ವಿವೇಕ ವಿದ್ಯಾ ಸಂಸ್ಥೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ನಾಲ್ವರು ಬಾಲಕರು ನಿತ್ಯ ಚುಡಾಯಿಸುತ್ತಿದ್ದರೆನ್ನಲಾಗಿದೆ. ಆಕೆ ಮಾತನಾಡಿದ್ದಳೆನ್ನಲಾದ ಆಡಿಯೋವನ್ನು ಮನೆಯವರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರೆನ್ನಲಾಗಿದೆ.
ಆಡಿಯೋ ತುಣುಕನ್ನು ಬಾಲಕಿಯ ತಾಯಿಗೆ ಈ ನಾಲ್ವರು ಸೇರಿ ಕಳುಹಿಸಿದ್ದರು. ಈ ವಿಚಾರ ಬಾಲಕಿಗೆ ತಿಳಿದು ಮನೆಯವರೆಲ್ಲರೂ ಜಮೀನಿನ ಕಡೆಗೆ ಹೋಗಿದ್ದ ವೇಳೆ ಯಾರೂ ಇಲ್ಲದಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂಪನಾ ಸಾವಿನ ಸುದ್ಧಿ ತಿಳಿಯುತ್ತಿದ್ದಂತೆ ಆರೋಪಿಗಳು ಗ್ರಾಮದಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಇಂಪನಾ ಸಾವಿನಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.