newsics.com
ಮಂಡ್ಯ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ನಾಗಮಂಗಲ ಉದ್ವಿಗ್ನಗೊಂಡಿದೆ.
ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ನಾಗಮಂಗಲ ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಕಲ್ಲು ತೂರಾಟ ನಡೆಸಿದ ಘಟನೆಯಿಂದ ಹಿಂದೂ-ಮುಸ್ಲೀಂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ, ಬಾಟಲಿಗಳನ್ನು ಎಸೆದ ಪರಿಣಾಮ 8 ಮಂದಿ ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದು, ಪೊಲೀಸ್ ಪೇದೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಕಿಡಿಗೇಡಿಗಳು ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿದ್ದಲ್ಲದೆ ಪೆಟ್ರೋಲ್ ಬಾಂಬ್ ಎಸೆದು ಆತಂಕ ಹೆಚ್ಚಿಸಿದ್ದಾರೆ. ಕಂಚಿ ವರದರಾಯ ಸ್ವಾಮಿ ದೇವಸ್ಥಾನಕ್ಕೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು, ನಾಗಮಂಗಲ ಪಟ್ಟಣದ ಹಲವೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಘಟನಾ ಸ್ಥಳದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಎಸ್ಪಿ ಸೇರಿ ಹಲವು ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.