newsics.com
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ರ ಉದ್ಘಾಟಕರನ್ನಾಗಿ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಂಪ ನಾಗರಾಜಯ್ಯ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದರು.
ಇದು ನನ್ನ ಭಾಗ್ಯ ಎಂದ ಹಂಪನಾ:
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾನು ಉದ್ಘಾಟನೆ ಮಾಡುತ್ತೇನೆ ಎಂದು ಕನಸು ಮನಸಿನಲ್ಲೂ ಯೋಚನೆ ಮಾಡಿರಲಿಲ್ಲ. ಆದರೆ ಈಗ ನನಗೆ ಆ ಅವಕಾಶ ಸಿಕ್ಕಿದೆ. ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ ಎಂದು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಸಂತಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದಸರಾವನ್ನು ಉದ್ಘಾಟನೆ ಮಾಡುವ ಆಸೆ ಇತ್ತು. ಆದರೆ ಅವಕಾಶ ಸಿಕ್ಕಿರಲಿಲ್ಲ. ಈಗ ಸಿಕ್ಕಿದೆ. ಇದು ನನಗೆ ಬಂದ ಭಾಗ್ಯ. ನಾನು 89 ವಯಸ್ಸಿಗೆ ಪದಾರ್ಪಣೆ ಮಾಡುತ್ತಿದ್ದೇನೆ. ಈ ವಯಸ್ಸಿನಲ್ಲಿ ಇಂತಹ ಭಾಗ್ಯ ಸಿಕ್ಕಿರುವುದು ಖುಷಿಯಾಗಿದೆ ಎಂದರು.
ಭರದ ಸಿದ್ಧತೆ:
ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಜೋರಾಗಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ.
2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.
ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.
ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 13ರಂದು ವಿಜಯದಶಮಿ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ.