newsics.com
ಮೈಸೂರು: ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೋರಾಗಿ ತಯಾರಿ ನಡೆದಿರುವ ವೇಳೆಯಲ್ಲೇ ನಗರದ ಹೊರವಲಯದಲ್ಲಿ ನಡೆದಿದೆ ಎನ್ನಲಾದ ರೇವ್ ಪಾರ್ಟಿ ಭಾರೀ ಸದ್ದು ಮಾಡುತ್ತಿದೆ.
ಕೆಆರ್ಎಸ್ ಬ್ಯಾಕ್ ವಾಟರ್ ಪ್ರದೇಶದಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮೈಸೂರು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ದಾಳಿಯನ್ನೂ ನಡೆಸಿದ್ದಾರೆ.
ಮೈಸೂರಿನ ಹೆಚ್ಚುವರಿ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ಪಾರ್ಟಿ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಕೆಲವರು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪಾರ್ಟಿಯಲ್ಲಿದ್ದ 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದೆ.
ಪಾರ್ಟಿಯಲ್ಲಿ 150ಕ್ಕೂ ಹೆಚ್ಚು ಯುವಕ, ಯುವತಿಯರು ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಅಲ್ಲದೇ, ಪಾರ್ಟಿಗೆ ಇಸ್ರೇಲ್ನಿಂದ ರ್ಯಾಪರ್ ಗ್ರೇನ್ ರಿಪ್ಪರ್ ಬಂದಿದ್ದ ಎಂದೂ ಹೇಳಲಾಗುತ್ತಿದೆ. ಆಯೋಜಕರು ಪಾರ್ಟಿಗೆ ಒಬ್ಬರಿಗೆ ತಲಾ 2 ಸಾವಿರ ರೂ. ನಿಗದಿ ಮಾಡಿದ್ದರು.
ಪ್ರಕರಣ ಸಂಬಂಧ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಪಾರ್ಟಿಯಲ್ಲಿ ಯಾವುದೇ ಮಾದಕವಸ್ತು ಸಿಕ್ಕಿಲ್ಲ. ಮದ್ಯ ಮತ್ತು ಸಿಗರೇಟ್ ಸ್ಥಳದಲ್ಲಿತ್ತು. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುತ್ತೇವೆ. ಎಫ್ಎಸ್ಎಲ್ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಎರಡೂ ವರದಿ ಬಂದ ನಂತರ ಪಾರ್ಟಿ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ.