newsics.com
ಬೆಂಗಳೂರು: ಮುಡಾದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಸಿಐಆರ್ ಪೊಲೀಸ್ ಎಫ್ಐಆರ್ ಸಮನಾಗಿರುತ್ತದೆ.
ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿದ್ದು ಈಗ ವಿವಾದದ ಕೇಂದ್ರಬಿಂದುವಾಗಿದೆ.
ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ