newsics.com
ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ದಸರಾ ಅಚರಣೆಗೆ ಅರಮನೆ ನಗರಿ ಮೈಸೂರು ಸಂಪೂರ್ಣ ಸಜ್ಜಾಗಿದೆ.
ಇಂದು (ಅಕ್ಟೋಬರ್ 3- ಗುರುವಾರ) ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೆಳಗ್ಗೆ 9-15 ರಿಂದ 9-45ರ ನಡುವೆ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರು ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ಸಚಿವರು, ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಈ ವರ್ಷ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು. ಹೀಗಾಗಿ ಪಾರಂಪರಿಕ ದಸರಾ ಅಥವಾ ನವರಾತ್ರಿ ಆಚರಣೆಗೆ ವಿದ್ಯುತ್ ದೀಪಾಲಂಕಾರಗಳಿಂದ ನವ ವಧುವಿನಂತೆ ಅಲಂಕೃತಗೊಂಡಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಎಲ್ಲರ ಗಮನ ಸೆಳೆಯುತ್ತಿದೆ.
ಮೈಸೂರಿನ ಅರಮನೆ, ಪ್ರಮುಖ ಬೀದಿಗಳು, ವೃತ್ತಗಳು ಮತ್ತು ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿದೆ. ರಾಜ್ಯದಾದ್ಯಂತ 508 ತಂಡಗಳ ಕಲಾವಿದರು ಸೇರಿದಂತೆ ಸುಮಾರು 6,500 ಕಲಾವಿದರು ಈ ಬಾರಿಯ ದಸರಾದಲ್ಲಿ ಸುಮಾರು 11 ವಿವಿಧ ವೇದಿಕೆಗಳಲ್ಲಿ ಪ್ರದರ್ಶನ ನೀಡಲಿದ್ದಾರೆ.
ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ರೈತರ ದಸರಾ, ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ ಮತ್ತು ಕವಿಗೋಷ್ಠಿ ನಡೆಯಲಿದೆ. ದೀಪಾಲಂಕೃತ ಅರಮನೆ ಎದುರು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಖ್ಯಾತ ಕಲಾವಿದರ ಪ್ರದರ್ಶನಕ್ಕೆ ಇದು ಪ್ರಮುಖ ವೇದಿಕೆಯಾಗಿದೆ.

ಇದೇ ವೇದಿಕೆಯಲ್ಲಿ ಮುಖ್ಯಮಂತ್ರಿಗಳು ಪ್ರತಿಷ್ಠಿತ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ಶಹನಾಯ್ ವಾದಕ ಹಾವೇರಿ ಜಿಲ್ಲೆಯ ಪಂಡಿತ್ ಬಸವರಾಜ ಭಜಂತ್ರಿ ಈ ಪ್ರಶಸ್ತಿಗೆ ಭಾಜನರಾಗಿದ್ದು, ಸಿಎಂ ಸಿದ್ದರಾಮಯ್ಯ ಗುರುವಾರ (ಅ.3) ಸಂಜೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮೈಸೂರು ರಾಜಮನೆತನದ ವಂಶಸ್ಥ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವೈದಿಕ ಸ್ತೋತ್ರಗಳ ಪಠಣಗಳ ನಡುವೆ ರತ್ನಖಚಿತ ಸಿಂಹಾಸನವನ್ನು ಏರುವ ಮೂಲಕ ಖಾಸಗಿ ದರ್ಬಾರ್ (ಖಾಸಗಿ ದರ್ಬಾರ್) ನಡೆಸುತ್ತಾರೆ.
ನವರಾತ್ರಿಯ 10 ನೇ ದಿನವಾದ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂ ಸವಾರಿ ಪ್ರಮುಖ ಆಕರ್ಷಣೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಹೊತ್ತು ಅಭಿಮನ್ಯು ಆನೆ ಬನ್ನಿಮಂಟಪದತ್ತ ಸಾಗಲಿದೆ. ಅಭಿಮನ್ಯುವಿಗೆ ಇತರ ಆನೆಗಳು ಸಾಥ್ ನೀಡಲಿವೆ. ಅಕ್ಟೋಬರ್ 12 ರಂದು ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಪ್ರದರ್ಶನದೊಂದಿಗೆ ಮೈಸೂರು ದಸರಾ 2024ಕ್ಕೆ ವಿಧ್ಯುಕ್ತ ತೆರೆ ಬೀಳಲಿದೆ.
10 ದಿನಗಳ ದಸರಾ ಆಚರಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮರಾಗಳ ಮೂಲಕ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.