newsics.com
ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ. ಮೂರು ಪ್ರಕರಣ ಸೇರಿದರೆ ಒಟ್ಟು 15 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 9.5 ಕೋಟಿ ರೂ. ದಂಡ ವಿಧಿಸಿದೆ.
ಮೂರನೇ ಪ್ರಕರಣದಲ್ಲಿ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಸೇರಿ ಒಟ್ಟ 15 ವರ್ಷ ಕಾರಾಗೃಹ ವಾಸದ ಶಿಕ್ಷೆ ಪ್ರಕಟಿಸಲಾಗಿದೆ.
2010ರ ಬೇಲೆಕೇರಿ ಬಂದರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿತ್ತು.
ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು.
ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿತ್ತು.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಗುರುವಾರ ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಲಾಗಿತ್ತು. ಈಗ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಎಲ್ಲ ಅಪರಾಧಿಗಳಿಗೆ 44 ಕೋಟಿಗೂ ಹೆಚ್ಚು ದಂಡ ವಿಧಿಸಿದ್ದು, ಈ ಹಣವನ್ನು ಸರ್ಕಾರ ವಸೂಲಿ ಮಾಡಬೇಕೆಂದು ಹೇಳಿದೆ.
ಶಾಸಕ ಸ್ಥಾನ ಅನರ್ಹ:
ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್ಗೆ 7 ವರ್ಷದಷ್ಟು ಜೈಲು ಶಿಕ್ಷ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.
ಇಡೀ ಪ್ರಕರಣದಿಂದ ಈಗ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪರಿಣಾಮಗಳು ಉಂಟಾಗಲಿದ್ದು ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಹೈಕೋರ್ಟ್ ತಡೆಹಿಡಿಯದಿದ್ದರೆ ಸತೀಶ್ ಸೈಲ್ ತಮ್ಮ ಶಾಸಕತ್ವದಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ.
ಸತೀಶ್ ಸೈಲ್ ಅವರಿಗೆ ಈ ಪ್ರಕರಣದಲ್ಲಿ ಹೈಕೋರ್ಟ್ ಒಂದು ವೇಳೆ ಜಾಮೀನು ನೀಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು. ಇಲ್ಲದಿದ್ದರೆ ಸತೀಶ ಅವರು ಜನಪ್ರತಿನಿಧಿಗಳ ಕಾಯ್ದೆ ಅಡಿಯಲ್ಲಿ ಅನರ್ಹರಾದರೆ ಆರು ತಿಂಗಳ ಒಳಗೆ ಕಾರವಾರ ವಿಧಾನಸಭೆಗೆ ಮತ್ತೊಮ್ಮೆ ಚುನಾವಣೆ ನಡೆಯಬೇಕಾಗಿ ಬರಬಹುದು.
ಹೀಗಾಗಿ ಇಂದು ತೀರ್ಪು ಪ್ರಕಟವಾಗಿದ್ದರೂ ಸತೀಶ ಸೈಲ್ ಅವರು ಹೈಕೋರ್ಟಿನಲ್ಲಿ ತೀರ್ಪನ್ನು ಪ್ರಶ್ನಿಸಿದ ನಂತರ ಹೈಕೋರ್ಟ್ ಯಾವ ತೀರ್ಮಾನಕ್ಕೆ ಬರುತ್ತದೆ ಎಂಬುದರ ಮೇಲೆ ಸತೀಶ್ ಅವರ ರಾಜಕೀಯ ಭವಿಷ್ಯ ನಿಂತಿದೆ.
ಏನಿದು ಪ್ರಕರಣ?:
ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಭಾರಿ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20 ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.
ಈ ಅದಿರನ್ನು ಕಾಯ್ದುಕೊಳ್ಳುವಂತೆ ಬೇಲೆಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆಯು ಸೂಚನೆಯನ್ನು ನೀಡಿತ್ತು.
ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಮರು ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಅದಿರು ನಾಪತ್ತೆ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆಯು ದೂರು ನೀಡಿತ್ತು.
ಈ ಅಕ್ರಮವೆಸಗಿದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತಾಯ ಮಾಡಿದ್ದರು. ಆಗ ಹಗರಣ ಬೆಳಕಿಗೆ ಬಂದಿತ್ತು.
2010ರ ಜೂ.23ರಂದು ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು.
ಸುಪ್ರೀಂಕೋರ್ಟ್ 2009 ರಿಂದ ಮೇ 2010ರ ನಡುವೆ ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಅದಿರು ಸಾಗಣೆ ಕುರಿತು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರಂತೆ ಸಿಬಿಐ 2013ರ ಸೆ.13 ರಂದು ಕೇಸ್ ದಾಖಲಿಸಿ ತನಿಖೆ ಕೈಗೊಂಡಿತ್ತು.
ಸತೀಶ್ ಮಾಲಿಕತ್ವದ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ತನಿಖೆಯಲ್ಲಿ ಕಂಡುಬಂತು.
ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್ ಅದಿರನ್ನು 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ರವಾನೆ ಮಾಡಲಾಗಿತ್ತು ಎಂಬುದನ್ನು ಕೇಂದ್ರೀಯ ಸಮಿತಿ ಪ್ರಾಧಿಕಾರ (ಸಿಇಸಿ) ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.
ಆರೋಪಿಗಳ ಜತೆ ಸಂಚು ರೂಪಿಸಿ ಸತೀಶ್ ಸೈಲ್ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದರು. ಹೀಗೆ ರಫ್ತಾಗಿರುವ ಅದಿರಿನಲ್ಲಿ 7.23 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ.ಲಿ. ಕಂಪನಿಯೇ ರಫ್ತು ಮಾಡಿತ್ತು ಎಂದು ಸಿಬಿಐ ಆರೋಪಿಸಿತ್ತು.
ಸಿಬಿಐ ಪರ ಎಸ್ಪಿಪಿ ಕೆ.ಎಸ್.ಹೇಮಾ, ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.