newsics.com
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪೊಲೀಸರು ಹೆಚ್ಚುವರಿ ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಅರ್ಹತೆಯ ಮೇರೆಗೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ತಿಳಿಸಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನಿನಲ್ಲಿರುವ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ವಾರ ಕಳೆದರೂ ಅವರಿಗೆ ಸರ್ಜರಿ ಮಾಡಿಲ್ಲ. ಈ ಕಾರಣದಿಂದ ಪೊಲೀಸರು ದರ್ಶನ್ ಅವರ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.