newsics.com
ಬೆಂಗಳೂರು: ಸೋಮವಾರ ತಡರಾತ್ರಿ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಬುಧವಾರ ಸಂಜೆ ನಡೆಯಲಿದೆ.
ಸೋಮನಹಳ್ಳಿಯತ್ತ ಕೃಷ್ಣ ಅವರ ಅಂತಿಮಯಾತ್ರೆ ಆರಂಭವಾಗಿದೆ. ಬುಧವಾರ ಬೆಳಗ್ಗೆ ಹತ್ತು ಗಂಟೆ ಹೊತ್ತಿಗೆ ಬಿಡದಿ ತಲುಪಿದ್ದು, ಸೋಮನಹಳ್ಳಿಯತ್ತ ಸಾಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.
ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಲಿದೆ,
ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಸೋಮನಹಳ್ಳಿಗೆ ಆಗಮಿಸಿ, ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಕೃಷ್ಣ ಅವರ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸೋಮನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಎಲ್ಲ ಸಚಿವರು ಮತ್ತು ಪಕ್ಷದ ಎಲ್ಲಾ ಶಾಸಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ನಾಯಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಬುಧವಾರ ರಾಜ್ಯಾದ್ಯಂತ ರಜೆ ಘೋಷಿಸಲಾಗಿದೆ. ಸದನದಲ್ಲೂ ಸಂತಾಪ ಸೂಚಿಸಲಾಗಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಎಸ್. ಎಂ. ಕೃಷ್ಣ ಅವರ ಪಾರ್ಥಿವ ಶರೀರವವನ್ನು ಬುಧವಾರ ಬೆಂಗಳೂರಿನ ಸದಾಶಿವ ನಗರದಿಂದ ಮಂಡ್ಯದ ಸೋಮನಹಳ್ಳಿಗೆ ಹಳೇ ಮೈಸೂರು ರಸ್ತೆಯಲ್ಲಿ ಕೊಂಡೊಯ್ಯಲಾಗುತ್ತಿದೆ.
ಇಂದು ಮದ್ದೂರು ಬಂದ್
ಮಾಜಿ ಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರ ಖಾತೆಯ ಸಚಿವ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬುಧವಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬುಧವಾರ ಮದ್ದೂರು ಬಂದ್ಗೆ, ಸ್ವಯಂಪ್ರೇರಿತವಾಗಿ ಕರೆ ನೀಡಿವೆ.
ಒಕ್ಕಲಿಗ ಸಂಘ, ದಲಿತ ಸಂಘಟನೆಗಳು, ಬಾರ್ ಎಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್ಗೆ ಬೆಂಬಲವನ್ನು ಸೂಚಿಸಿದ್ದು, ಬಂದ್ ಮೂಲಕ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸಲ್ಲಿಸಲು ಸಂಘಟನೆಗಳು ನಿರ್ಧರಿಸಿವೆ.
ಬಿಗಿ ಪೊಲೀಸ್ ಬಂದೋಬಸ್ತ್
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಬಂದೋಬಸ್ತ್ ಗಾಗಿ ಅಂತ್ಯಕ್ರಿಯೆ ಸ್ಥಳದಲ್ಲಿ ಮಂಡ್ಯ ಜಿಲ್ಲೆಯ ಪೊಲೀಸರಲ್ಲದೇ ಹೊರ ಜಿಲ್ಲೆಗಳಿಂದಲೂ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ ಪಿ, ಮೂವರು ಹೆಚ್ಚುವರಿ ಎಸ್ಪಿ ಹಾಗೂ 10 ಡಿವೈಎಸ್ಪಿಗಳನ್ನು ನಿಯೋಜಿಸಲಾಗಿದೆ. 70 ಪಿಎಸ್ಐ, 700 ಪೊಲೀಸ್ ಸಿಬ್ಬಂದಿ, 6 ಕೆಎಸ್ ಆರ್ ಪಿ, 6 ಡಿಎಎರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.