newsics.com
ಹೈದರಾಬಾದ್: ಪುಷ್ಪ-2 ಚಿತ್ರ ಪ್ರೀಮಿಯರ್ ಪ್ರದರ್ಶನದ ವೇಳೆ ನಡೆದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ-2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.
ಈಗ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ, ಅರ್ಜಿಯ ವಿಲೇವಾರಿಗೆ ಬಾಕಿ ಉಳಿದಿರುವ ಪ್ರಕ್ರಿಯೆ ಮತ್ತು ಬಂಧನಕ್ಕೆ ತಡೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲು ಅರ್ಜುನ್ ಅವರು ಮೃತ ಮಹಿಳೆಯ ಕುಟುಂಬಕ್ಕೆ ₹25 ಲಕ್ಷ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದಾರೆ.