newsics.com
ಬಳ್ಳಾರಿ: ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.
ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.