newsics.com
ಸಾಗರ: ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್ಆರ್ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿದ ಘಟನೆ ನಡೆದಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಕೆಎಸ್ಆರ್ಟಿಸಿ ಶಿರಸಿ ಡಿಪೋ ಪರಿಹಾರ ನೀಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
2022ನೇ ಸಾಲಿನ ಜುಲೈ 7ರಂದು ಬೆಳಿಗ್ಗೆ 5:30ರ ವೇಳೆಗೆ ಗಣೇಶ್ ಎಂಬ ಯುವಕ ಪತ್ರಿಕೆ ಹಂಚಲು ಸೈಕಲ್ನಲ್ಲಿ ತೆರಳುತ್ತಿದ್ದಾಗ ಪ್ರವಾಸಿ ಮಂದಿರದ ಎದುರು ಕೆಎಸ್ಆರ್ಟಿಸಿ ಬಸ್ ಸೈಕಲ್ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ಪರಿಣಾಮದಿಂದಾಗಿ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಮೃತ ಗಣೇಶನ ಪೋಷಕರು ಅಪಘಾತಕ್ಕೆ ಪರಿಹಾರ ಕೋರಿ ಸಾಗರದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳಿನೊಳಗೆ ಪರಿಹಾರ ನೀಡುವಂತೆ 2024ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಮೂರು ತಿಂಗಳು ಕಳೆದರೂ ಕೆಎಸ್ಆರ್ಟಿಸಿ ಪರಿಹಾರ ನೀಡದ ಕಾರಣ ಗಣೇಶನ ತಾಯಿ ಉಮಾ ಅವರು ನ್ಯಾಯಾಲಯಕ್ಕೆ ಅಮಲ್ದಾರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ನೋಟಿಸ್ ಜಾರಿ ಆದ ನಂತರವೂ ಕೆಎಸ್ಆರ್ಟಿಸಿ ಪರಿಹಾರದ ಹಣ ಪಾವತಿಸದ ಕಾರಣ ಶಿರಸಿ ಡಿಪೋಗೆ ಸೇರಿದ ಬಸ್ಸನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಬಸ್ಸನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.