newsics.com
ಬೆಂಗಳೂರು: ಬಿಜೆಪಿ ಶಾಸಕರ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ಇಂದು ವಿಧಾಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿತು.
“ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಎಚ್ ಕೆ ಪಾಟೀಲ್ ಹೇಳಿದರು.
ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ವಕ್ಫ್ ಕಾಯ್ದೆಯ ತಿದ್ದುಪಡಿಯನ್ನು ಈ ಸದನವು ಸರ್ವಾನುಮತದಿಂದ ತಿರಸ್ಕರಿಸುತ್ತದೆ. ಏಕೆಂದರೆ ಇದು ಕರ್ನಾಟಕದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ಹೆಚ್.ಕೆ ಪಾಟೀಲ್ ಅವರು ಹೇಳಿದರು.