ಬೆಂಗಳೂರು: ರಾಜ್ಯದಾದ್ಯಂತ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಏರಿಕೆ ಆಗುತ್ತಿವೆ. ತೀವ್ರಗತಿಯಲ್ಲಿ ಸೋಂಕು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರಿಗೆ ಬೆಡ್ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಡೆಂಘೀ ಜ್ವರ ಆಘಾತಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಸಲ ಮಳೆಗಾಲ ಆರಂಭವಾದಾಗಿನಿಂದ ಮಳೆಯ ಕಣ್ಣಾಮುಚ್ಚಾಲೆ ಹಾಗೂ ಬಿಸಿಲು ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗದೆ ವಾತಾವರಣದಲ್ಲಿ ವ್ಯತ್ಯಯವಾಗಿರುವುದು, ಅದರ ಜೊತೆಗೆ ಸೊಳ್ಳೆಗಳ ಹಾವಳಿಯೂ ಹೆಚ್ಚಿರುವುದರಿಂದ ಡೆಂಘೀ ಜ್ವರದ ಸೋಂಕು ಕ್ಷಿಪ್ರಗತಿಯಲ್ಲಿ ಹರಡುತ್ತಿದೆ.
ಬೆಂಗಳೂರಿನಲ್ಲಿ ಡೆಂಘೀ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಕ್ರಮ ಹಾಗೂ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದ್ದಾರೆ. ಅದರಂತೆ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ತಾಲೂಕುಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಡೆಂಘೀ ಸೋಂಕಿತರಿಗೆ ಬೆಡ್ ಸಿಗುತ್ತಿಲ್ಲ. ಬಹುಶಃ ಆರೋಗ್ಯ ಇಲಾಖೆ ಈ ಬಗ್ಗೆ ಸಮಗ್ರ ಅಂಕಿಅಂಶಗಳನ್ನೇ ತರಿಸಿಕೊಂಡಂತಿಲ್ಲ. ಏಕೆಂದರೆ ಬೆಂಗಳೂರಿನ ಹೊರಗೆ ಡೆಂಘೀ ಸೋಂಕು ಹರಡುತ್ತಿರುವ ಬಗ್ಗೆ ಆರೋಗ್ಯಾಧಿಕಾರಿಗಳು ಮಾತನಾಡುತ್ತಿಲ್ಲ. ಆದರೆ, ಹಳ್ಳಿಹಳ್ಳಿಗಳಲ್ಲೂ ಡೆಂಘೀ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ವರದಿಗಳಂತೂ ಬರುತ್ತಿವೆ.