newsics.com
ಬೆಂಗಳೂರು: ಪ್ರಸ್ತುತ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಸರ್ಕಾರಿ ಕಚೇರಿಗಳ ಸಮಯ ಬದಲಾವಣೆಗೊಳಿಸಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಂತೆ ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯ ನಗರ ಈ ಏಳು ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗೆ ವಿಜಯಪುರ ಮತ್ತು ಬಾಗಲಕೋಟೆ ಸೇರಿ ಒಟ್ಟಾರೆ 9 ಜಿಲ್ಲೆಯಗಳಲ್ಲಿ ಏಪ್ರಿಲ್ ಹಾಗೂ ಮೇ ಈ ಎರಡು ತಿಂಗಳಲ್ಲಿ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.
ಈ ಕುರಿತು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.
ಕಳೆದ 2020 ರಿಂದ ಅಂದರೆ ಕಳೆದ ಐದು ವರ್ಷಗಳಿಂದ ಬೇಸಿಗೆ ಅವಧಿಯಲ್ಲಿ ಸರ್ಕಾರಿ ಕಚೇರಿ ವೇಳೆ ಬದಲಾವಣೆ ಸ್ಥಗಿತವಾಗಿರುವುದನ್ನು ಈ ಸಲ ತೆರವುಗೊಂಡು ಕಚೇರಿಗಳು ಈ ಮೊದಲಿನ ಸಮಯದಂತೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಕಾರ್ಯನಿರ್ವಹಿಸಲಿವೆ ಎಂಬುದಾಗಿ ಕಳೆದ ಮಾರ್ಚ 28 ರ ಉದಯವಾಣಿ ಯಲ್ಲಿ ವಿಶೇಷ ವರದಿ ಮಾಡಲಾಗಿತ್ತು. ವರದಿಯಂತೆ ಇಂದು ಆದೇಶ ಹೊರ ಬಿದ್ದಿದೆ.
ಸರ್ಕಾರಿ ಕಚೇರಿಗಳ ಬದಲಾದ ಸಮಯದಲ್ಲಿ ಸರ್ಕಾರಿ ನೌಕರರು ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ ಮತ್ತು ಅಡೆತಡೆಯಿಲ್ಲದೇ ಕರ್ತವ್ಯ ನಿರ್ವಹಿಸತಕ್ಕದ್ದು ಹಾಗೂ ಡಿಸಿ ಮತ್ತು ಜಿ.ಪಂ ಸಿಇಓ ಅವರು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.