newsics.com
ಕೊಪ್ಪಳ: ಭ್ರಷ್ಟಾಚಾರದಲ್ಲಿ ಈಗ ಕರ್ನಾಟಕ ನಂಬರ್ ಒನ್ ಆಗಿದ್ದು, ಇದರಿಂದ ರಾಜ್ಯದಲ್ಲಿ ಯಾವುದೇ ಗುಣಮಟ್ಟದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಶಾಸಕ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ ಎಂದು ಅವರು ಹೇಳಿದ್ದಾರೆ.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದಿದ್ದಾರೆ.
ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚು ತಾಂಡವವಾಡುತ್ತಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯ? ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ. ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
22 ವರ್ಷಗಳಷ್ಟು ಹಳೆಯದಾದ ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸಿನಲ್ಲಿ ಸೇರಿಸಿ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್ ಆರ್. ಅವರಿಗೆ ಇದೇ ವೇಳೆ ಹೇಳಿದರು.
POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್: ಕಮಿಷನರ್ ಎಚ್ಚರಿಕೆ