newsics.com
ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ.
ಭಾನುವಾರ ಸಚಿವ ರಹೀಂಖಾನ್ ಅವರ ಜತೆ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ.
ಘಟನೆ ಗಮನಕ್ಕೆ ಬಂದ ತಕ್ಷಣ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ. ಕಾಲೇಜಿನ ಪ್ರಾಂಶುಪಾಲರನ್ನು ಸಸ್ಪೆಂಡ್ ಮಾಡಲಾಗಿದೆ ಎಂದರು.
ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ. ಹೀಗಾಗಿ ಭಾಲ್ಕಿಯ ತಮ್ಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟು ನೀಡುವುದಾಗಿ ಭರವಸೆ ನೀಡಿದರು.
ಸುಚಿವ್ರತ್ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ ವಿದ್ಯಾರ್ಥಿಗೆ ಕಾಮಡ್ ಕೆ ಪರೀಕ್ಷೆ ಬರೆಯಲೂ ವಿದ್ಯಾರ್ಥಿಗೆ ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು. ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟುಂಬದ ಸದಸ್ಯರೊಂದಿಗಿದೆ ಎಂದು ಭರವಸೆ ನೀಡಿದರು.
Janivara ಧಾರವಾಡದಲ್ಲೂ ಜನಿವಾರ ವಿವಾದ: ಜನಿವಾರ ಕತ್ತರಿಸಿ ವಿದ್ಯಾರ್ಥಿ ಕೈಗೆ ಕೊಟ್ಟ ಸಿಬ್ಬಂದಿ
Astro ಈ ಬಾರಿಯ ಅಕ್ಷಯ ತೃತೀಯದಂದು ಹಲವು ರಾಜಯೋಗ, 7 ರಾಶಿಯವರಿಗೆ ಭಾರೀ ಅದೃಷ್ಟ, ಸಂಪತ್ತು ವೃದ್ಧಿ