newsics.com
ನವದೆಹಲಿ: ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಇದು ಟ್ರೇಲರ್ ಅಷ್ಟೇ. ನಾವು ಪಾಕಿಸ್ತಾನಕ್ಕೆ ಸಮಯ ನೀಡಿದ್ದೇವೆ. ಅವರ ನಡವಳಿಕೆ ಸುಧಾರಿಸಿದರೆ ಸರಿ, ಇಲ್ಲದಿದ್ದರೆ, ಅದಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಸದ್ಯ ಏನೇ ನಡೆದರೂ ಅದು ಕೇವಲ ಟ್ರೇಲರ್ ಮಾತ್ರ. ಸರಿಯಾದ ಸಮಯ ಬಂದಾಗ, ನಾವು ಪೂರ್ತಿ ಸಿನಿಮಾವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಆಪರೇಷನ್ ಸಿಂಧೂರ ವೇಳೆ ಭಾರತೀಯ ವಾಯುಪಡೆ ಮತ್ತು ಸಶಸ್ತ್ರ ಪಡೆಗಳ ಅಸಾಧಾರಣ ಪ್ರದರ್ಶನವನ್ನು ಶ್ಲಾಘಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ಭಾರತದ ಮಿಲಿಟರಿ ಶಕ್ತಿ ಮತ್ತು ಸನ್ನದ್ಧತೆಗೆ ಒಂದು ಅದ್ಭುತ ನಿದರ್ಶನವಾಗಿದೆ ಎಂದರು.
ಗುರುವಾರ ಶ್ರೀನಗರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಭೇಟಿಯಾಗಿದ್ದ ರಕ್ಷಣಾ ಸಚಿವರು ಇಂದು ಶುಕ್ರವಾರ ಗುಜರಾತ್ನ ಭುಜ್ ವಾಯು ನೆಲೆಗೆ ಭೇಟಿ ನೀಡಿ, “ವಾಯುಪಡೆಯ ವೀರ ಯೋಧರ” ಜೊತೆ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ರಕ್ಷಣಾ ಸಚಿವರು, “ನಮ್ಮ ವಾಯುಪಡೆಯು ತನ್ನ ಶೌರ್ಯ, ಧೈರ್ಯ ಮತ್ತು ವೈಭವದಿಂದ ಹೊಸ ಎತ್ತರ ತಲುಪಿದೆ. ಭಯೋತ್ಪಾದನೆಯ ವಿರುದ್ಧದ ಆಪರೇಷನ್ ಸಿಂಧೂರ ಅಭಿಯಾನವನ್ನು ವಾಯುಪಡೆ ಪರಿಣಾಮಕಾರಿಯಾಗಿ ಮುನ್ನಡೆಸಿದೆ” ಎಂದು ಹೊಗಳಿದರು.
ಆಪರೇಷನ್ ಸಿಂಧೂರದಲ್ಲಿ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವುದಷ್ಟೇ ಅಲ್ಲ, ನಾಶ ಮಾಡುವುದರಲ್ಲೂ ಭಾರತೀಯ ಸಶಸ್ತ್ರ ಪಡೆಗಳು ಯಶಸ್ವಿಯಾಗಿವೆ. ಪಾಕ್ನ ಹಲವು ವಾಯು ನೆಲೆಗಳು ನಾಶವಾಗಿವೆ. ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಭಾರತ ಧ್ವಂಸಗೊಳಿಸಿದ್ದನ್ನು ಇಡೀ ವಿಶ್ವವೇ ನೋಡಿದೆ. ಈ ಮೂಲಕ ನವ ಭಾರತದ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದೀರಿ ಎಂದು ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಹೇಳಿದರು.
ಪಾಕಿಸ್ತಾನಕ್ಕೆ ಐಎಂಎಫ್ ಹಣಕಾಸು ನೆರವು ನೀಡುವುದನ್ನು ಮರು ಪರಿಶೀಲಿಸಬೇಕು. ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ನೀಡುವ ಹಣಕಾಸು ಸೇರಿ ಯಾವುದೇ ನೆರವು ಕೂಡ ಭಯೋತ್ಪಾದನೆಗೆ ನೀಡಿದಂತಾಗಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
Virat Kohli ವಿರಾಟ್ ಕೊಹ್ಲಿ 10 ನೇ ತರಗತಿ ಅಂಕಪಟ್ಟಿ ವೈರಲ್: ಪಡೆದ ಅಂಕ ಎಷ್ಟು?