newsics.com
ಬೆಂಗಳೂರು: ಎಂಟು ವರ್ಷ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 2000 ನೂತನ ಸಿಬ್ಬಂದಿ ನೇಮಕಾತಿ ಮಾಡಿಕೊಂಡಿದ್ದು, ಮಂಗಳವಾರ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ಪತ್ರ ವಿತರಣೆ ಮಾಡಲಾಯಿತು.
ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಸಾಂಕೇತಿಕವಾಗಿ 51 ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ವಿತರಣೆ ಮಾಡಿದರು.
ನಂತರ ಮಾತನಾಡಿದ ಸಚಿವರು, ಚಾಲನಾ ಸಿಬ್ಬಂದಿಯ ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇರುವುದಿಲ್ಲ. ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗಿದೆ ಎಂದರು.
ಸುಮಾರು 8 ವರ್ಷಗಳ ನಂತರ ಕೆಎಸ್ಆರ್ಟಿಸಿಯಲ್ಲಿ ನೇಮಕಾತಿ ನಡೆಸಿದಂತಾಗಿದೆ.
ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಚಿರು ಸೂಚನೆ ನೀಡಿದರು.
ಅಪಘಾತ ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು. ನಿಗಮವು ಕರೋನಾ ನಂತರ ಹಲವು ಅಡತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದ್ದು, ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ನಾಲ್ಕು ಸಾರಿಗೆ ನಿಗಮಗಳು 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿ ಕುಟುಂಬಕ್ಕೆ 10 ಲಕ್ಷ ರೂ.ಗಳ ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕರಾದ ಡಾ. ನಂದಿನಿದೇವಿ, ಇಬ್ರಾಹಿಂ ಮೈಗೂರ, ಮುಖ್ಯ ಸಂಪರ್ಕಾಧಿಕಾರಿ ಡಾ.ಲತಾ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಐಶ್ವರ್ಯ ಗೌಡ ವಂಚನೆ ಪ್ರಕರಣ; ಡಿಕೆ ಸುರೇಶ್ಗೆ ಇಡಿಯಿಂದ ಸಮನ್ಸ್ ಜಾರಿ