newsics.com
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಅಸ್ವಸ್ಥರಾಗಿದ್ದಾರೆ. 79 ವರ್ಷ ವಯಸ್ಸಿನ ದೊಡ್ಡರಂಗೇಗೌಡ ಅವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ಇದೀಗ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.
ಡಾ. ದೊಡ್ಡರಂಗೇಗೌಡ ಅವರದ್ದು ಕನ್ನಡ ಸಾಹಿತ್ಯ ಮತ್ತು ಸಿನಿರಂಗದಲ್ಲಿ ಬಹುದೊಡ್ಡ ಹೆಸರು. ಪ್ರಾಧ್ಯಾಪಕರಾಗಿದ್ದ ದೊಡ್ಡರಂಗೇಗೌಡ ಅವರು, ಕವಿಯಾಗಿ, ಸಾಹಿತಿಯಾಗಿ ಜನಪ್ರಿಯರು
ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯವರು. ಬೆಂಗಳೂರಿನ ಎಸ್.ಎಲ್.ಎನ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದ ಇವರು, ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದರು. ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಇವರು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ಪ್ರವಾಸ ಕಥನ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಇವರ ಪ್ರಮುಖ ಕೃತಿಗಳೆಂದರೆ ಅನನ್ಯನಾಡು , ಪಿರಮಿಡ್ಡುಗಳ ಪರಿಸರದಲ್ಲಿ (ಪ್ರವಾಸ ಕಥನ), ಸಿದ್ಧೇಶ್ವರ ಸ್ತುತಿ, ಭಕ್ತಿ ಕುಸುಮಾಂಜಲಿ (ಭಕ್ತಿಗೀತೆಯ ಕೃತಿ), ಪ್ರೀತಿ ಪ್ರಗಾಥ, ಹಳ್ಳಿ ಹುಡುಗಿ ಹಾಡು-ಪಾಡು ವರ್ತಮಾನದ ವ್ಯಂಗ್ಯದಲ್ಲಿ, ವಿಚಾರವಾಹಿನಿ, ವಿಶ್ವಮುಖಿ (ಗದ್ಯ ಕೃತಿ) ಜಗಲಿ ಹತ್ತಿ ಇಳಿದು, ಕಣ್ಣು ನಾಲಗೆ ಕಡಲು, ನಾಡಾಡಿ, ಮೌನಸ್ಪಂದನ (ಕಾವ್ಯ),ಹಿಮಶ್ವೇತಾ, ಮಯೂರ ದರ್ಶನ, ಚಂದ್ರಗಿರಿ ದರ್ಶನ, ಸಾಧನ ಸಿರಿ (ರೂಪಕ) ಮುಂತಾದವು