newsics.com
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಳ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ.
ಫೋನ್ಪೇ ಸಂಸ್ಥಾಪಕ ಮತ್ತು ಸಿಇಒ ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಅವರು ರಾಜ್ಯ ಸರ್ಕಾರದ ನಡೆಯನ್ನು ಬಲವಾಗಿ ಟೀಕಿಸಿದ್ದಾರೆ.
ನನ್ನ ಮಕ್ಕಳು ತಮ್ಮ ಸ್ವಂತ ಊರಿನಲ್ಲಿ ಕೆಲಸಕ್ಕೆ ಸೇರಲು ಅನರ್ಹರಾ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ರೂಪಿಸಿದ ಮಸೂದೆಯನ್ನು ನಾಚಿಕೆಗೇಡಿನ ಕ್ರಮ ಎಂದು ಬಣ್ಣಿಸಿದ್ದಾರೆ.
ನನಗೆ 46 ವರ್ಷ ವಯಸ್ಸಾಗಿದೆ. ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡಿದ್ದಾರೆ. ದೇಶಾದ್ಯಂತ ಅವರ ಪೋಸ್ಟಿಂಗ್ ಆಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗ ಗಳಿಸಲು ಅರ್ಹರಲ್ಲವಾ? ನಾನು ಕಂಪನಿಗಳನ್ನು ಸ್ಥಾಪಿಸಿದ್ದೇನೆ. ದೇಶಾದ್ಯಂತ 25,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಅವರ ಸ್ವಂತ ನಗರದಲ್ಲಿ ಕೆಲಸ ಮಾಡಲು ಅನರ್ಹರಾ? ಇದು ನಾಚಿಕೆಗೇಡಿತನದ ಸಂಗತಿ’ ಎಂದು ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಉದ್ಯಮಿಗಳ ವಿರೋಧಕ್ಕೆ ಬೆಚ್ಚಿದ ಸಿಎಂ ಸಿದ್ದರಾಮಯ್ಯ, ‘ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ ಮೊದಲಾದ ಕೆಲ ರಾಜ್ಯಗಳು ಇದೇ ರೀತಿಯಲ್ಲಿ ಸ್ಥಳೀಯರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕೊಡುವ ಪ್ರಯತ್ನ ಮಾಡಿದ್ದವು. ನ್ಯಾಯಾಲಯಗಳಲ್ಲಿ ಇವುಗಳಿಗೆ ಬೆಂಬಲ ಸಿಕ್ಕಿಲ್ಲ. ರಾಜ್ಯ ಸರ್ಕಾರ ಒಂದು ವೇಳೆ ವಿಧೇಯಕ ತಂದರೂ ಕೋರ್ಟ್ನಲ್ಲಿ ಅದು ರದ್ದುಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ.
ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ