newsics.com
ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡ ಅವರನ್ನು ಕೂಡ ಪೊಲೀಸರು ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜತೆ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ ಜಾತ್ರೆಯಲ್ಲಿ ಭಾಗಿಯಾಗಿ ಫಾರ್ಮ್ಹೌಸ್ಗೆ ಕುದುರೆ ಖರೀದಿಸಲು ಅವರು ತೆರಳಿದ್ದರು. ಜಾತ್ರೆಯಲ್ಲಿ ಎರಡು ಕುದುರೆಗಳನ್ನು ಫೈನಲ್ ಮಾಡಿದ್ದರು. ಜಾತ್ರೆಯಲ್ಲಿರುವಾಗಲೇ ಸ್ನೇಹಿತ ಧನ್ವೀರ್ ದೂರವಾಣಿ ಕರೆ ಮಾಡಿ ಸುಪ್ರೀಂಕೋರ್ಟ್ನ ತೀರ್ಪಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ದರ್ಶನ್ ಅವರು ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಬಂದರು. ಪತ್ನಿ ವಿಜಯಲಕ್ಷ್ಮೀಯ ಫ್ಲ್ಯಾಟ್ನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಈಗ ಮತ್ತೆ ಸಂಕಷ್ಟದ ದಿನಗಳು ಆರಂಭ ಆಗಿವೆ.
‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂಬ ಹಾಡನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದ ದರ್ಶನ್ ಅವರಿಗೆ ಕೋರ್ಟ್ ತೀರ್ಪಿನಿಂದ ನೆಮ್ಮದಿಯೇ ಕಳೆದುಹೋಗುವಂತಾಗಿದೆ.
ಹೊಸಕೆರೆಹಳ್ಳಿಯಲ್ಲಿರುವ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ನ 15ನೇ ಮಹಡಿಯಲ್ಲಿರುವ ವಿಜಯಲಕ್ಷ್ಮೀ ಫ್ಲ್ಯಾಟ್ ನಂ.4154ರಲ್ಲಿ ಪೊಲೀಸರು ಬಂಧಿಸಿದರು. ಇನ್ನೋವಾ ಕಾರಿನಲ್ಲಿ ಬಂದ ದರ್ಶನ್ ಅವರು ವಿಜಯಲಕ್ಷ್ಮೀ ಫ್ಲ್ಯಾಟ್ಗೆ ಹಿಂಬದಿ ಗೇಟ್ನಿಂದ ಆಗಮಿಸಿದ್ದರು. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗೇಶ್, ಗೋವಿಂದರಾಜನಗರ ಠಾಣೆ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ನೇತೃತ್ವದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಈ ಮಧ್ಯೆ, ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ದರ್ಶನ್ ಅವರಿಗೆ ಹೈಕೋರ್ಟ್ನಲ್ಲಿ ಬೇಲ್ ಸಿಕ್ಕಾಗ ನಮಗೆ ಸ್ವಲ್ಪ ಆತಂಕವಾಗಿತ್ತು. ಆದರೆ ಸರ್ಕಾರದವರು ದೊಡ್ಡ ಮನಸ್ಸು ಮಾಡಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈಗ ಬೇಲ್ ರದ್ದಾಗಿದೆ. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಎಲ್ಲರಿಗೂ ತಿಳಿಸಿಕೊಟ್ಟಂತಾಗಿದೆ’ ಎಂದು ಕಾಶಿನಾಥಯ್ಯ ಅವರು ಹೇಳಿದ್ದಾರೆ.
ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?
IMPS ಸೇವೆಗಿನ್ನು ಎಸ್ಬಿಐ ಶುಲ್ಕ: ನಾಳೆಯಿಂದಲೇ ಜಾರಿ, ಗ್ರಾಹಕರಿಗೆ ಶಾಕ್