newsics.com
ಕಿಯೋಂಜಾರ್: ಶಾಲೆ ಬಿಡುವ ಸಮಯದಲ್ಲಿ 2ನೇ ಕ್ಲಾಸ್ ಬಾಲಕಿಯೊಬ್ಬಳು ಶಾಲಾ ಕೊಠಡಿಯೊಳಗೆ ನಿದ್ದೆಗೆ ಜಾರಿ ಸಂಕಷ್ಟಕ್ಕೀಡಾಗಿದ್ದಾಳೆ.
ಶಾಲೆಗೆ ಬೀಗ ಹಾಕುವ ವೇಳೆ ಶಿಕ್ಷಕರು ವಿದ್ಯಾರ್ಥಿನಿ ಜ್ಯೋತ್ಸ್ನಾ ದೇಹುರಿ ಕೊಠಡಿಯೊಳಗೆ ನಿದ್ದೆಗೆ ಜಾರಿದ್ದನ್ನು ಗಮನಿಸಿಲ್ಲ. ತರಗತಿಯಲ್ಲಿ ಯಾವ ಮಕ್ಕಳೂ ಬಾಕಿಯಾಗಿಲ್ಲ ಎಂಬುದನ್ನು ಪರಿಶೀಲನೆ ನಡೆಸದೆಯೇ ಶಾಲಾ ಸಿಬ್ಬಂದಿ ಶಾಲೆಗೆ ಬೀಗ ಹಾಕಿ ಹೋಗಿದ್ದಾರೆ. ಆದರೆ ನಿದ್ದೆಗೆ ಜಾರಿದ ಬಾಲಕಿಗೆ ಸ್ವಲ್ಪ ಹೊತ್ತಿನಲ್ಲೇ ಎಚ್ಚರವಾಗಿದ್ದು, ಕತ್ತಲ ಕೋಣೆಯಲ್ಲಿ ತಾನೊಬ್ಬಳೇ ಬಾಕಿಯಾಗಿರುವುದು ತಿಳಿದು ಭಯಗೊಂಡಿದ್ದಾಳೆ.
ಜತೆಗೆ ಶಾಲೆಯ ಕಿಟಕಿಯ ಕಬ್ಬಿಣದ ಸರಳುಗಳ ಮೂಲಕ ಆಕೆ ಹೊರಗೆ ಬರುವ ಪ್ರಯತ್ನ ಮಾಡಿದ್ದಾಳೆ. ಆದರೆ ದೇಹವನ್ನು ಹೊರಗೆ ತಳ್ಳುವಲ್ಲಿ ಯಶಸ್ವಿಯಾದ ಈ 2ನೇ ಕ್ಲಾಸ್ ಮಗುವಿಗೆ ತನ್ನ ತಲೆಯನ್ನು ಈ ಕಿಟಕಿಯ ಕಬ್ಬಿಣದ ಸರಳುಗಳಿಂದ ಹೊರಗೆ ತರಲು ಸಾಧ್ಯವಾಗದೆ ಕಷ್ಟಪಟ್ಟಿದ್ದಾಳೆ.
ರಾತ್ರಿಯಿಡೀ ಬಾಲಕಿ ಕಾಡುಪ್ರಾಣಿಗಳ ಭಯದ ಜತೆ ಈ ಕತ್ತಲ ಕೋಣೆಯ ಕಿಟಕಿಯಲ್ಲಿ ತಲೆ ಸಿಲುಕಿಸಿಕೊಂಡೇ ಕಾಲ ಕಳೆದಿದ್ದಾಳೆ.
ಇತ್ತ ಈಕೆಯ ಪೋಷಕರು ದಿನಗೂಲಿ ನೌಕರರಾಗಿದ್ದು, ಮಗಳು ಶಾಲೆಯಿಂದ ಬಾರದೇ ಇರುವುದನ್ನು ನೋಡಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಆದರೆ ಬಾಲಕಿ ಮಾತ್ರ ಅವರಿಗೆ ಸಿಗಲಿಲ್ಲ, ಅವರು ಶಾಲೆಯ ಆವರಣಕ್ಕೆ ಮಗಳನ್ನು ಹುಡುಕಿಕೊಂಡು ಬಂದಿಲ್ಲ, ಹೀಗಾಗಿ ಮರುದಿನ ಬೆಳಗ್ಗೆ ಶಾಲೆ ಬಾಗಿಲು ತೆರೆದ ನಂತರವಷ್ಟೇ ಶಾಲಾ ಬಾಲಕಿ ಕಿಟಕಿಯಲ್ಲಿ ಸಿಲುಕಿದ ತನ್ನ ತಲೆಯನ್ನು ಬಿಡಿಸಿಕೊಳ್ಳಲು ಯತ್ನಿಸುತ್ತಾ ಸುಸ್ತಾಗಿ ಕಿಟಕಿಯಲ್ಲೇ ಕುಳಿತಿರುವುದು ಬೆಳಕಿಗೆ ಬಂದಿದೆ.
ಕೂಡಲೇ ಗ್ರಾಮಸ್ಥರು ಕಿಟಕಿಯ ಸರಳನ್ನು ಅಗಲಿಸಿ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಅಂಜಾರ್ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇತ್ತ ಚಿಂತೆಗೀಡಾದ ಜ್ಯೋತ್ಸ್ನಾಳ ಪೋಷಕರು ರಾತ್ರಿಯಿಡೀ ಅವಳನ್ನು ಹುಡುಕಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಶುಕ್ರವಾರ (ಆಗಸ್ಟ್ 22) ಬೆಳಗ್ಗೆ ಶಾಲೆ ಮತ್ತೆ ತೆರೆದಾಗ, ಕಿಟಕಿಯ ಕಂಬಿಯ ಮೂಲಕ ಪುಟ್ಟ ಹುಡುಗಿ ನೇತಾಡುತ್ತಿರುವುದನ್ನು ಕಂಡು ಅವರು ಗಾಬರಿಗೊಂಡಿದ್ದಾರೆ. ಕೂಡಲೇ ಜ್ಯೋತ್ಸ್ನಾಳ ರಕ್ಷಣೆಗೆ ಧಾವಿಸಿದ ಗ್ರಾಮಸ್ಥರು ಕಬ್ಬಿಣದ ಸರಳುಗಳನ್ನು ಬಗ್ಗಿಸಿ ಅವಳನ್ನು ಬಿಡುಗಡೆ ಮಾಡಿದರು. ನಂತರ ಅವಳನ್ನು ಕಿಯೋಂಜಾರ್ ಜಿಲ್ಲಾಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವಳನ್ನು ಪರೀಕ್ಷಿಸಿ ಪೋಷಕರಿಗೆ ಹಸ್ತಾಂತರಿಸಿದರು.
ಶಿಕ್ಷಕರು ಮತ್ತು ಸಿಬ್ಬಂದಿಯ ಕಡೆಯಿಂದ ಇದೊಂದು ಸಂಪೂರ್ಣ ನಿರ್ಲಕ್ಷ್ಯದ ಘಟನೆ ಅವರು ಯಾವುದೇ ಮಗುವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕಿತ್ತು. ನನ್ನ ಪುಟ್ಟ ಮಗಳು ರಾತ್ರಿಯನ್ನು ಹೇಗೆ ಕಳೆದಳು ಎಂಬುದನ್ನು ಊಹಿಸಿಯೇ ಭಯವಾಗುತ್ತಿದೆ ಎಂದು ಜ್ಯೋತ್ಸ್ನಾ ಅವರ ತಾಯಿ ಜುನು ದೇಹುರಿ ಹೇಳಿದ್ದಾರೆ.
ಬಾಲಕಿ ತರಗತಿಯೊಳಗೆ ನಿದ್ರಿಸಿದ್ದಳು, ಕೊಠಡಿಯಲ್ಲಿ ಮಕ್ಕಳು ಇದ್ದಾರೋ ಇಲ್ಲವೋ ಎಂದು ಸರಿಯಾದ ತಪಾಸಣೆ ಮಾಡದೇ ಲಾಕ್ ಮಾಡಲಾಗಿತ್ತು. ಈ ಘಟನೆ ದುರದೃಷ್ಟಕರ ಎಂದು ಶಾಲೆಯ ಶಿಕ್ಷಕಿ ಸಂಜಿತಾ ದಾಶ್ ಹೇಳಿದ್ದಾರೆ. ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರಾದ ಗೌರಹರಿ ಮೊಹಂತ ಅವರನ್ನು ನಿರ್ಲಕ್ಷ್ಯದ ಆರೋಪದಡಿ ಅಮಾನತುಗೊಳಿಸಲಾಗಿದೆ.