Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ತುಮಕೂರು: ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಟ್ಟಿಂಗ್ ಕಟ್ಟಿ 500 ರೂಪಾಯಿ ಕಳೆದುಕೊಂಡಿದ್ದಾರೆ. ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದ್ದರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆಗುತ್ತಿದ್ದು, ಒಂದು ಸ್ಥಾನದಲ್ಲಿದ್ದವರು ಈ ರೀತಿ ಮಾಡುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಟೀಕಿಸುತ್ತಿದ್ದಾರೆ.
ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದರು.
ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ್ ಅವರು ಮಾತನಾಡಿ, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದು, ಈ ಸಂಬಂಧ ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.