newsics.com
ಕೋಲಾರ: ಪರಸ್ಪರ ಪ್ರೀತಿಸಿ ಕಷ್ಟಪಟ್ಟು ಹಸೆಮಣೆಯೇರಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ ಸೇರಿರುವ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದೆ.
ಆದರೆ, ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದುಬಂದಿಲ್ಲ. ಇದು ಕೊಲೆಯೇ, ಆತ್ಮಹತ್ಯೆಯೇ ಎಂಉದೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಸಿಕ್ಕ ಬಳಿಕವೂ ಪೊಲೀಸರಿಗೆ ಘಟನೆಯ ಚಿತ್ರಣ ಸ್ಪಷ್ಟವಾಗಿಲ್ಲ. ಹೀಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಈ ಜೋಡಿಯ ಸಾವಿನ ವಿಚಾರವಾಗಿ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆ ಈ ಕೊಲೆಯಲ್ಲಿ ಮೂರನೇ ವ್ಯಕ್ತಿ ಇರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಮತ್ತಷ್ಟು ಅಂಶಗಳು ಬಯಲಾಗಿವೆ. ಸಾವಿಗೀಡಾದ ನವೀನ್ ಜನ ಸೇನೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ನವೀನ್ ಮೃತಪಟ್ಟಿದ್ದಾರೆ.
ಮದುವೆ ದಿನ ಸಂಜೆ ರೂಮ್ಗೆ ಹೋಗಿ ಬಾಗಿಲು ಹಾಕಿಕೊಂಡ ದಂಪತಿ ಕೆಲವೇ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಲಿಖಿತಾಶ್ರೀ ಕೆಜಿಎಫ್ ಆಸ್ಪತ್ರೆಯಲ್ಲಿ ಮೊನ್ನೆ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಪ್ರಾಣಬಿಟ್ಟಿದ್ದಾರೆ.
ಈ ಘಟನೆಯಲ್ಲಿ ದಂಪತಿ ಬಾಳು ಅಂತ್ಯವಾಗಲು ನಿಖರ ಕಾರಣವೇನೆಂಬುವುದು ಪತ್ತೆಯಾಗಿಲ್ಲ. ಆದರೆ ಮೂರನೇ ವ್ಯಕ್ತಿ ಇರುವ ಬಗ್ಗೆ ಶಂಕೆ ಇನ್ನಷ್ಟು ಬಲವಾಗಿದೆ.
ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಮೊದಲು ಲಿಖಿತಾಶ್ರೀ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿರಬಹುದು ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವ್ಯಕ್ತವಾಗಿದೆ. ಆದರೆ ಲಿಖಿತಾಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದೆ.
ಇಬ್ಬರಿಗೂ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಒಬ್ಬರೂ ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ಕೋಲಾರ ಜಿಲ್ಲೆ ಕೆಜಿಎಫ್ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ನವೀನ್ ವಿರುದ್ದ ಕೊಲೆ ಪ್ರಕರಣ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ನಿನ್ನೆ ಸಂಜೆ ವಧು ಲಿಖಿತಶ್ರೀ ಹಾಗೂ ವರ ನವೀನ್ ಅಂತ್ಯಸಂಸ್ಕಾರ ಮಾಡಲಾಗಿದೆ. ಕುಟುಂಬಸ್ಥರು ಬೈನೇಹಳ್ಳಿಯಲ್ಲಿ ಲಿಖಿತಶ್ರೀ ಹಾಗೂ ಚಂಬಾರಸನಹಳ್ಳಿ ಗ್ರಾಮದಲ್ಲಿ ನವೀನ್ ಅಂತ್ಯಸಂಸ್ಕಾರ ಮುಗಿಸಿದ್ದಾರೆ.
ಆಂಡರ್ಸನ್ ಪೇಟೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ. ಶುಕ್ರವಾರ ಪೊಲೀಸರು ನವೀನ್, ಲಿಖಿತಾಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಲಿದ್ದಾರೆ. ಇಬ್ಬರ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.
ಘಟನೆಗೂ ಮುನ್ನ ಇಬ್ಬರು ಯಾರ ಜತೆಗಾದರೂ ಫೋನ್ನಲ್ಲಿ ಮಾತನಾಡಿದ್ದರಾ ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮದುವೆಗೂ ಮೊದಲು ಎರಡೂ ಕುಟುಂಬದ ನಡುವೆ ದ್ವೇಷವಿತ್ತಾ? ನವೀನ್ ಮಾನಸಿಕ ಸ್ಥಿತಿ ಹೇಗಿತ್ತು ಎಂಬುದನ್ನು ತಿಳಿಯಲು ಪೊಲೀಸರು ನವೀನ್ ಸ್ನೇಹಿತರು ಹಾಗೂ ಆಪ್ತರ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
Paris Olympics 2024 ಜಾವೆಲಿನ್ ಥ್ರೋ: ‘ಚಿನ್ನದ ಹುಡುಗ’ ನೀರಜ್ ಚೋಪ್ರಾಗೆ ಬೆಳ್ಳಿ, ಭಾರತಕ್ಕೆ ಮೊದಲ ‘ರಜತ’ ಸಂಭ್ರಮ
ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…