https://youtube.com/shorts/NQT6o3FTgxQ?si=QO7iNw2quSngYXpc
newsics.com
ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮತ್ತು ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆ, ಭಾರತದ ವಿದೇಶಾಂಗ ನೀತಿ ಹಾಗೂ ಯುದ್ಧ ನಡೆಯುತ್ತಿರುವ ದೇಶಗಳಲ್ಲಿ, ಗಲ್ಫ್ ರಾಷ್ಟ್ರಗಳಲ್ಲಿ ಇರುವ ಭಾರತೀಯರ ರಕ್ಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಚರ್ಚೆ ನಡೆದಿದೆ.
ಈ ಕುರಿತು ಮಾತನಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಹಾರ್ಮುಜ್ ಜಲಸಂಧಿಯು ಇರಾನ್ ಮತ್ತು ಓಮನ್ ನಡುವಿನ ಕಿರಿದಾದ, ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾಗಿದೆ. ಈ ಮಾರ್ಗದಲ್ಲಿ ಕಚ್ಚಾ ತೈಲದ ಸಾಗಾಣಿಕೆಯನ್ನು ಇರಾನ್ ತಡೆದಿದೆ. ಇದು ಭಾರತಕ್ಕೆ ಸಂಕಷ್ಟವನ್ನು ತಂದೊಡ್ಡಿದೆ. ಇದೀಗ ಇರಾನ್ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿಯು ದಿನದಿಂದ ದಿನಕ್ಕೆ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಮೇಲೆ ಇದು ಯಾವ ರೀತಿಯ ಪರಿಣಾಮವನ್ನು ಬೀರಲಿದೆ ಎನ್ನುವ ವಿಚಾರವೂ ಸಹ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಎಲ್ಲ ಗೊಂದಲಗಳಿಗೂ ಇದೀಗ ಎಸ್. ಜೈಶಂಕರ್ ಉತ್ತರಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಲ್ಲಿಯಲ್ಲಿರುವ ಭಾರತೀಯರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘರ್ಷದ ನಡುವೆ ಸಿಲುಕಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ರಾಯಭಾರ ಕಚೇರಿ ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದೆ. ಆದರೆ ಕತಾರ್ ಮತ್ತು ಜೋರ್ಡಾನ್ನಂತಹ ದೇಶಗಳಲ್ಲಿ ಸಿಲುಕಿರುವ ಭಾರತೀಯರಿಗೆ ಸಹಾಯ ಮಾಡಲು ಮತ್ತು ಅವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಇರಾನ್ನಲ್ಲಿ ವಾಸಿಸುವ ಭಾರತೀಯ ಪ್ರಜೆಗಳಿಗೆ ಸಲಹೆಗಳನ್ನು ನೀಡಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಟೆಹ್ರಾನ್ ಮೇಲೆ ಅಮೆರಿಕ – ಇಸ್ರೇಲಿ ದಾಳಿಗಳನ್ನು ಗಮನಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಇನ್ನು ಭಾರತದ ಕೊಚ್ಚಿ ಬಂದರಿನಲ್ಲಿ ಇರಾನ್ ನೌಕಾಪಡೆಯ ನೌಕೆ ಐಆರ್ಐಎಸ್ ಲವನ್ಗೆ ಆಶ್ರಯ ನೀಡಿದ್ದಕ್ಕಾಗಿ ಭಾರತಕ್ಕೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಧನ್ಯವಾದ ಅರ್ಪಿಸಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ರಾಜ್ಯಸಭೆಗೆ ಇರಾನ್ ಯುದ್ಧದ ಕುರಿತು ಮಾಹಿತಿ ನೀಡುವ ಸಂದರ್ಭದಲ್ಲಿ ಈ ವಿಷಯವನ್ನು ಉಲ್ಲೇಖಿಸಿದ್ದಾರೆ. ಶ್ರೀಲಂಕಾದ ಕರಾವಳಿಯಲ್ಲಿ ಅಮೆರಿಕದ ಮಿಲಿಟರಿ ಪಡೆಗಳು ಇರಾನ್ನ ಐಆರ್ಐಎಸ್ ದೇನಾ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಇರಾನ್ನ 87 ಜನ ಸೈನಿಕ ಸಾವನ್ನಪ್ಪಿದ್ದರು. ಇದಾದ ನಂತರ ಇರಾನ್ ಸೇನೆಗೆ ಭಾರತವು ಆಶ್ರಯ ನೀಡಿತ್ತು. ಆದರೆ ಅಮೆರಿಕದ ದಾಳಿಯ ಬಗ್ಗೆ ಭಾರತವು ಪ್ರತಿಕ್ರಿಯೆ ನೀಡದೆ ಇರುವುದಕ್ಕೆ ತೀವ್ರ್ ಆಕ್ಷೇಪ ವ್ಯಕ್ತವಾಗಿತ್ತು.