newsics.com
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ಗೆ ಕೋರ್ಟ್ ಏನು ತೀರ್ಪು ಕೊಡುತ್ತೆ ಎನ್ನುವ ಅತಂಕ ಶುರುವಾಗಿದೆ.
2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.
ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹಾಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು.
ಇದಕ್ಕೆ ಆಕ್ಷೇಪಿಸಿ, ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಕೂಡ ಸರಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ನ ಮೊರೆ ಹೋಗಿದೆ.
ಮೊಬೈಲ್ ಬಳಕೆದಾರರೇ ಎಚ್ಚರ; ಲಿಂಕ್ ಒತ್ತಿ ₹12.70 ಲಕ್ಷ ಕಳೆದುಕೊಂಡ ಪ್ರಾಧ್ಯಾಪಕ!