newsics.com/ನ್ಯೂಸಿಕ್ಸ್
ನವದೆಹಲಿ: ದೇಶದ ಮೂರನೇ ಎರಡರಷ್ಟು ಭಾಗ ಸೂರ್ಯನ ಕಡುಕೋಪಕ್ಕೆ ಗುರಿಯಾದಂತಿದೆ. ಹಲವು ರಾಜ್ಯಗಳಲ್ಲಿ ಬಿಸಿಲು ತೀವ್ರತರವಾಗಿದ್ದು, ಜನ-ಜಾನುವಾರು ತತ್ತರಿಸುವಂತಾಗಿದೆ. ಬಿಸಿಗಾಳಿಯು ಉಸಿರಾಡುವ ಗಾಳಿಗೂ ಸಂಚಕಾರ ತಂದೊಡ್ಡಿದೆ.
ಇತ್ತೀಚಿನ ಮಾಹಿತಿಯ ಪ್ರಕಾರ ವಾಯವ್ಯ, ಮಧ್ಯ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ನಿಂದ 44 ಡಿಗ್ರಿ ಸೆಲ್ಸಿಯಸ್ ನಡುವೆ ಇದೆ. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗರಿಷ್ಠ ತಾಪಮಾನ 44.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.
ಹಲವಾರು ಪ್ರದೇಶಗಳಲ್ಲಿ, ತಾಪಮಾನ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯ ಭಾರತದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆ ವಾತಾವರಣ ಇರುವ ಸಾಧ್ಯತೆಯಿದೆ ಎಂದೂ ಐಎಂಡಿ ಮುನ್ಸೂಚನೆ ನೀಡಿದೆ.
ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಲಿರುವ ಬೇಸಿಗೆಯ ಬಿಸಿಲನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಹವಾಮಾನ ಇಲಾಖೆಯು ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಸಿಗಾಳಿಯ ತೀವ್ರತೆ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ ಅಧಿಕವಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅದು ಸೂಚಿಸಿದೆ.
ಮಧ್ಯಾಹ್ನದ ಸಮಯದಲ್ಲಿ ಸೂರ್ಯನ ಬೆಳಕಿಗೆ ಹೆಚ್ಚು ಹೊತ್ತು ಒಡ್ಡಿಕೊಳ್ಳುವುದನ್ನು ತಪ್ಪಿಸಿ.
ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಗಮನಹರಿಸಿ. ಸಾಕಷ್ಟು ನೀರು ಕುಡಿಯಿರಿ.
ಹಗುರವಾದ ಮತ್ತು ಸಡಿಲ ಇರುವ ಬಟ್ಟೆಗಳನ್ನು ಧರಿಸಿ.
ತಾಪಮಾನ ಹೆಚ್ಚಿರುವ ಸಮಯದಲ್ಲಿ ಕಠಿಣವಾದ ಹೊರಾಂಗಣ ಕೆಲಸಗಳನ್ನು ಮಾಡಬೇಡಿ.
ಮಕ್ಕಳು, ವೃದ್ಧರು ಮತ್ತು ಅನಾರೋಗ್ಯದ ಸಮಸ್ಯೆ ಇರುವವರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಐಎಂಡಿ ಸಲಹೆ ನೀಡಿದೆ
ಬಿಸಿಲಾಘಾತ ಮತ್ತು ತೀವ್ರ ಸುಸ್ತನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ಹವಾಮಾನ ಇಲಾಖೆ ಹೇಳಿದೆ.
https://www.newsics.com/2026/04/26/is-your-phones-storage-full-dont-worry-follow-this-trick/