newsics.com/ನ್ಯೂಸಿಕ್ಸ್
ಬೆಂಗಳೂರು: ಮಾರ್ಚ್ ತಿಂಗಳ ಆರಂಭದಲ್ಲೇ ರಾಜ್ಯದ ಜನತೆಗೆ ಸೂರ್ಯನ ಬಿಸಿ ಮುಟ್ಟುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದೆ. ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಹೆಚ್ಚು ದಾಖಲಾಗುತ್ತಿದೆ. ಇದರ ನಡುವೆಯೇ ಮತ್ತೊಂದು ಆಘಾತಕಾರಿ ವರದಿ ಹೊರಬಂದಿದ್ದು, ಮುಂದಿನ ವಾರ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಎಚ್ಚರಿಕೆಯನ್ನು ನೀಡಿದೆ.
ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರು ಮುಂದಿನ ಏಳು ದಿನಗಳ ಹವಾಮಾನ ವರದಿಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್, ಬೀದರ್ನಲ್ಲಿ 43 ಡಿಗ್ರಿ ಸೆಲ್ಸಿಯಸ್, ವಿಜಯಪುರ 40 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 34 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಚಾಮರಾಜನಗರ, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. ಈಗ ಇರೋ ಹವಾಮಾನ ಮುನ್ಸೂಚನೆ ನೋಡುವುದಾದರೆ, ಮೇ 03 ರಿಂದ ಮೇ 09ರ ವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಪ್ರತಿಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದೆ.
ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಗರಿಷ್ಠ ಉಷ್ಣಾಂಶ 35-37 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಕರ್ನಾಟಕ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ ಎತ್ತರದಲ್ಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮಳೆಯ ಜೊತೆಗೆ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.