newsics.com/ನ್ಯೂಸಿಕ್ಸ್
ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕೆಂದು ಈ ಹಿಂದೆ ತಾವು ನೀಡಿದ್ದ ಆದೇಶಗಳನ್ನು ತಿದ್ದುಪಡಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಔಷಧ ನೀಡಬೇಕು. ಆ ನಾಯಿಗಳನ್ನು ಮತ್ತೆ ಮೊದಲಿದ್ದ ಪ್ರದೇಶಗಳಿಗೆ ಬಿಡಬಾರದು.
ಈ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಸರ್ಕಾರಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ 2025ರ ನವೆಂಬರ್ನಲ್ಲಿ ತೀರ್ಪು ನೀಡಿತ್ತು. ಈ ತೀರ್ಪನ್ನು ತಿದ್ದುಪಡಿ ಮಾಡಬೇಕು ಎಂದು ಶ್ವಾನ ಪ್ರಿಯರು ಹಾಗೂ ಸಾಮಾಜಿಕ ಕಾರ್ಯಕ್ರತರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಪೀಠವು, ಬೀದಿ ನಾಯಿಗಳು ಸಾರ್ವಜನಿಕರ ಮೇಲೆ, ಅದರಲ್ಲೂ ವಿಶೇಷವಾಗಿ ಅಮಾಯಕ ಮುಗ್ಧ ಮಕ್ಕಳ ಮೇಲೆ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವ ಭೀಕರ ನಿದರ್ಶನಗಳನ್ನು ನಾವು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ಸಾರ್ವಜನಿಕರ ಸುರಕ್ಷತೆಯೇ ನಮಗೆ ಮುಖ್ಯ ಎಂದು ಖಡಕ್ ಆಗಿ ಹೇಳಿತು. ಅರ್ಜಿದಾರರು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಗಳಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಬಲವಾದ ಕಾರಣಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.