newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.